ಶಿಕಾರಿಪುರ, ಮೇ.26 : ಕೇಂದ್ರ ಸರ್ಕಾರವು ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ನೀಡಿದರೂ ರಾಜ್ಯ ಸರ್ಕಾರ ರೈತರಿಗೆ ಸಮರ್ಪಕವಾಗಿಗೊಬ್ಬರ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಪಟ್ಟಣದ ತಾಲ್ಲೂಕು ಕಚೇರಿ ಎದುರು ಮಂಗಳವಾರ ಬಿಜೆಪಿ ರೈತ ಮೋರ್ಚಾ ವತಿ ಯಿಂದ ತಾಲ್ಲೂಕಿನ ರೈತರ ವಿವಿಧ ಬೇಡಿಕೆಗಳ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲೀಗಾಗಲೇ ಮುಂಗಾರು ಆರಂಭವಾಗುತ್ತಿದ್ದು ರೈತರು ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ. ಇವರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅವಶ್ಯಕತೆ ಇದ್ದು ಕೇಂದ್ರ ಸರ್ಕಾರದಿಂದ ಇದಕ್ಕೆ ಸೂಕ್ತ ಕ್ರಮ ಕೈಗೊಂಡು ಯಥೇಚ್ಛವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ವಿತರಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರದಲ್ಲಿ ಬಗರ್ ಹುಕುಂ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊಡಲು ಸಾಧ್ಯವಾಗುತ್ತಿಲ್ಲ ಎಂದರು.
ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 6 ಸಾವಿರ ಸಹಾಯಧನ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ 4 ಸಾವಿರ ಕಡತಗೊಳಿಸಿದೆ. ಬಿ ಗ್ರಾಮೀಣ ಪ್ರದೇಶದ ರೈತರ ಹೈನುಗಾರಿಕೆಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಳೆದ ಮೂರು ವರ್ಷದಲ್ಲಿ 860 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಿಲ್ಲ. ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದಿದ್ದ ಬೆಳೆಗಳು ಸಂಪೂರ್ಣ ಹಾಳಾಗಿದ್ದು ಆದರೆ ಸರ್ಕಾರದಿಂದ ಪರಿಹಾರ ಧನ ನೀಡಲಾಗುತ್ತಿಲ್ಲ ಎಂದರು.
ಸಂಸದ ಬಿ ವೈ ರಾಘವೇಂದ್ರ ಮಾತನಾಡಿ, ರಾಜ್ಯ ಸರ್ಕಾರದಿಂದ ಕಂದಾಯ ಇಲಾಖೆಗೆ ಸಂಬಂಸಿದ ಭೂಮಿಯನ್ನು ಅರಣ್ಯ ಭೂಮಿಯ ಡೀಮ್ ಫಾರೆಸ್ಟ್ ಎಂದು ಮಾಡಲು ಹೊರಟಿದೆ. ಇದರಿಂದಾಗಿ ಜಿಲ್ಲೆಯ 50 ಸಾವಿರ ಬಗರ್ಹುಕುಂ ರೈತರಿಗೆ ಭೂಮಿ ಕಳೆದುಕೊಳ್ಳುವ ಭೀತಿ ಉಂಟಾಗಿದೆ. ಇದರಿಂದಾಗಿ ಬಿಜೆಪಿಯಿಂದ ಜಿಲ್ಲೆಯದಂತೆ ಸರ್ಕಾರದ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
ಪ್ರತಿಭಟನೆಗೂ ಮುನ್ನ ತಾಲ್ಲೂಕಿನ ಪ್ರಮುಖ ಬೀದಿಗಳಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಲಾಯಿತು. ಪ್ರತಿಭಟನೆಯ ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಿಂಬೆಗೊಂದಿ ಸಿದ್ದಲಿಂಗಪ್ಪ, ಬಿಜೆಪಿ ತಾಲ್ಲೂಕು ಮಂಡಲದ ಅಧ್ಯಕ್ಷ ಸಂಕ್ಲಾಪುರದ ಹನುಮಂತಪ್ಪ ತಾಲೂಕು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಚ್ ಆರ್ ಯೋಗೀಶಪ್ಪ, ತಾಲೂಕು ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ಈಸೂರು ಜಗದೀಶ್ ಗುರುರಾಜ್ ಜಕ್ಕಿನಕೊಪ್ಪ, ಮುಖಂಡರಾದ ಹುಲ್ಮಾರ್ ಮಹೇಶ್, ಬಂಗಾರಿ ನಾಯ್ಕ್, ಗಾಯಿತ್ರಿ ಮಲ್ಲಪ್ಪ, ನಿವೇದಿತಾ ರಾಜು, ಭಾಗವಹಿಸಿದ್ದರು.
