ಶಿವಮೊಗ್ಗ, ಜೂ.06 : ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ ಘಟನೆ ಸಂಭವಿಸಿದ್ದು, ಕುಂದಾಪುರದ ಕಡೆಗೆ ತೆರಳುತ್ತಿದ್ದ ದುರ್ಗಾಂಬ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮಧ್ಯಭಾಗದಲ್ಲಿ ಸಂಚರಿಸುತ್ತಿದ್ದ ವೇಳೆ ಬಸ್ನ ಎಂಜಿನ್ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದ್ದು, ವಾಹನವು ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಶಿವಾನಂದ ಕೆ. ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾಂತ್ರಿಕ ದೋಷ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
