ಶಿವಮೊಗ್ಗ, ಜೂನ್.18 : ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯು ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಅತ್ಯಾಚಾರವಾಗಿದೆ. ಕೇಂದ್ರ ಸರ್ಕಾರ ಕೇವಲ ಒಂದು ತಿಂಗಳ ಅವಧಿಯಲ್ಲಿ ಎಸ್ಐಆರ್ ಮಾಡಲು ಹೊರಟಿದೆ. ದಲಿತರನ್ನು, ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಹುನ್ನಾರ ಎಸ್ಐಆರ್ನಲ್ಲಿ ಅಡಗಿದೆ. ಆದ್ದರಿಂದ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಪ್ರೆಸ್ ಟ್ರಸ್ಟಿನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಈ ಎಸ್ಐಆರ್ ಪ್ರಕ್ರಿಯೆಯಿಂದ 91 ಲಕ್ಷ ಮತದಾರರು ತಮ್ಮ ಹಕ್ಕನ್ನು ಕಳೆದುಕೊಂಡಿದ್ದಾರೆ. 21 ಲಕ್ಷ ಮತದಾರರ ತಕರಾರು ಇನ್ನೂ ಬಾಕಿ ಇದೆ. ಎಸ್ಐಆರ್ನ್ನು ಕಾಂಗ್ರೆಸ್ ವಿರೋಧಿಸುವುದಿಲ್ಲ. ಆದರೆ ಇದಕ್ಕಾಗಿ ಕೇವಲ ಒಂದು ತಿಂಗಳ ಕಾಲಾವಕಾಶವನ್ನು ಕೊಟ್ಟಿರುವುದನ್ನು ವಿರೋಧಿಸುತ್ತೇವೆ. ಈ ಅವಧಿಯಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಮಾಡಲು ಸಾಧ್ಯವೇ? ಕನಿಷ್ಟ ಆರು ತಿಂಗಳಾದರೂ ಕಾಲಾವಕಾಶ ನೀಡಿದರೆ ಉತ್ತಮ ವಾಗಿರುತ್ತಿತ್ತು ಎಂದು ಪ್ರಶ್ನಿಸಿದರು.
ಈ ದೇಶವನ್ನು ದಮನ ಮಾಡಲು ಮೋದಿ ಮತ್ತು ಅಮಿತ್ ಷಾ ಸಿದ್ದರಾಗಿದ್ದಾರೆ. ಎಸ್ ಐ ಆರ್ ಮೂಲಕ ಈ ದೇಶದ ಭವಿಷ್ಯವನ್ನು ರೂಪಿಸುವ ಅಲ್ಪಸಂಖ್ಯಾತರು ಮತ್ತು ದಲಿತರ ಹಕ್ಕನ್ನು ಕಸಿಯಲು ಸನ್ನದ್ಧರಾಗಿದ್ದಾರೆ.ಆದರೆ ಕೇಂದ್ರ ಸರ್ಕಾರದ ಇಷ್ಟೊಂದು ಆತುರ ತೋರುವುದೇಕೆ. ಇದರ ಹಿಂದೆ ಏನೋ ಅಡಗಿದೆ ಎಂದ ಅವರು, ತಕರಾರು ಸಲ್ಲಿಸಲು ಅವಕಾಶವಿದ್ದರೂ ಕೂಡ ಈ ದೇಶದ ಅತ್ಯಂತ ಹಿಂದುಳಿದ, ಅಲ್ಪಸಂಖ್ಯಾತರಿಗೆ, ದಲಿತರಿಗೆ ಈ ಮಾಹಿತಿಯಾದರೂ ಹೇಗೆ ತಲುಪಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಚುನಾವಣಾ ಆಯೋಗ ಉಲ್ಲೇಖಿಸಿರುವ 12 ದಾಖಲೆಗಳಲ್ಲಿ ಹೆಸರು ಸಾಮ್ಯತೆ ಇಲ್ಲದಿದ್ದರೆ ಅಥವಾ ಕನ್ನಡ ಕಾಗುಣಿತ ಇಂಗ್ಲೀಷ್ ಸ್ಪೆಲಿಂಗ್ನಲ್ಲಿ ವ್ಯತ್ಯಾಸವಾದರೂ ಕೂಡ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಹಾಗಾಗಿ ಎಸ್ ಐಆರ್ ಪ್ರಕ್ರಿಯೆಗೆ ಕನಿಷ್ಠ ಒಂದು ವರ್ಷವಾದರೂ ಸಮಯ ಬೇಕಾಗುತ್ತದೆ ಎಂದರು.
ಬಿಜೆಪಿ ಜಾತಿ ಮತ್ತು ಧರ್ಮವನ್ನು ರಾಜಕೀಯಕ್ಕೆ ತಂದು ರಾಜಕಾರಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದು, ಈ ದೇಶವನ್ನು ಇನ್ನೊಂದು ಅಫ್ಘಾನಿಸ್ತಾನ್ ಹಾಗೂ ತಾಲಿಬಾನ್ ಮಾಡಲು ಹೊರಟಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಹಿರಿಯ ಮುಖಂಡ ಇಸ್ಮಾಯಿಲ್ಖಾನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು, ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಶಿವಾನಂದ ಹಾಜರಿದ್ದರು.
