ಶಿವಮೊಗ್ಗ,ಮೇ .27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅವರ ಜಾಗಕ್ಕೆ ಬೇರೆ ಯಾರೇ ಸಿಎಂ ಆದರೂ ರಾಜ್ಯದ ಆಡಳಿತದಲ್ಲಿ ತೀವ್ರ ಗೊಂದಲಗಳು ಉಂಟಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಕನಿಷ್ಠ ಮಟ್ಟದ ಉತ್ತಮ ಆಡಳಿತ ನೀಡಲು ಕೂಡ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಆಡಳಿತ ವೈಫಲ್ಯವನ್ನು ಸ್ವತಃ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಕೊಂಡಿದೆ. ಇದೇ ಕಾರಣಕ್ಕೆ ನಿನ್ನೆ ದೆಹಲಿಯಲ್ಲಿ 5 ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆಸಲಾಗಿದ್ದು, ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವ ಅಂತಿಮ ತೀರ್ಮಾನಕ್ಕೆ ಬರಲಾಗಿದೆ.
ಸಿದ್ದರಾಮಯ್ಯ ಅವರು ಇವತ್ತೋ ಅಥವಾ ನಾಳೆಯೋ ರಾಜೀನಾಮೆ ನೀಡಲಿದ್ದಾರೆ. ಆದರೆ, ಅವರ ನಂತರ ಯಾರು ಸಿಎಂ ಆಗುತ್ತಾರೆ ಎಂಬುದು ಮುಖ್ಯವಲ್ಲ, ಅವರ ನಿರ್ಗಮನದ ಬಳಿಕ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗುವುದು ಮಾತ್ರ ನಿಶ್ಚಿತ ಎಂದು ವಿಜಯೇಂದ್ರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನನಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಅವರು ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಅನುಭವ ಹೊಂದಿರುವ ಮುತ್ಸದ್ದಿ ರಾಜಕಾರಣಿ. ಆದರೆ, ಅವರ ಆಡಳಿತಾವಧಿಯಲ್ಲಿ ರಾಜ್ಯವನ್ನು ಬರೋಬ್ಬರಿ 10 ಲಕ್ಷ ಕೋಟಿ ರೂಪಾಯಿಗಳ ಭಾರಿ ಸಾಲದ ಸುಳಿಗೆ ಸಿಲುಕಿಸಲಾಗಿದೆ. ಭ್ರಷ್ಟಾಚಾರ ಮತ್ತು ಆಂತರಿಕ ಕಚ್ಚಾಟದಿಂದಾಗಿ ಇಡೀ ಆಡಳಿತ ಯಂತ್ರ ಕುಸಿದು ಬಿದ್ದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣಗಳೇ ಇದಕ್ಕೆ ಸಾಕ್ಷಿ. ರಾಜ್ಯದ ಇತಿಹಾಸದಲ್ಲೇ ಪ್ರಾಮಾಣಿಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಕರಾಳ ಪರಿಸ್ಥಿತಿ ನಿರ್ಮಾಣವಾಗಿದ್ದು ಇದೇ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಎಂದು ಆರೋಪಿಸಿದರು.
ಇತ್ತೀಚೆಗೆ ನಡೆದ ಉಪಚುನಾವಣೆಗಳ ಗೆಲುವು ಸರ್ಕಾರದ ಸಾಧನೆಗೆ ಮಾನದಂಡವಲ್ಲ. ಒಂದು ವೇಳೆ ಅದುವೇ ಮಾನದಂಡವಾಗಿದ್ದರೆ ಇವತ್ತು ಸಿಎಂ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತಿರಲಿಲ್ಲ. ಸಿದ್ದರಾಮಯ್ಯ ಅವರು ಅಷ್ಟು ಸುಲಭವಾಗಿ ಕುರ್ಚಿಯಿಂದ ಕೆಳಗಿಳಿಯುವವರಲ್ಲ, ಆದರೆ ಹೈಕಮಾಂಡ್ ಕಟ್ಟುನಿಟ್ಟಿನ ಆದೇಶ ನೀಡಿರುವುದರಿಂದ ಅವರಿಗೆ ರಾಜೀನಾಮೆ ಅನಿವಾರ್ಯವಾಗಿದೆ. ನಾನು ಒಬ್ಬ ಶಾಸಕನಾಗಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ನಂತರ ಯಾರು ಸಿಎಂ ಆದರೂ ಅದು ಕೇವಲ ತಾತ್ಕಾಲಿಕ ಅಷ್ಟೆ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಎಚ್ಚರಿಸಿದರು.
