ಈಜಲು ಹೋಗಿದ್ದ ಮೂವರು ಬಾಲಕರು ಜಲಸಮಾಧಿ

Kranti Deepa
ಧಾರವಾಡ,ಮೇ.30 : ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಇಂದು ಮಧ್ಯಾಹ್ನ ಗ್ರಾಮದ ಪಕ್ಕದಲ್ಲಿ ಇರುವ ಕೆರೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಈ ವೇಳೆ ಕೆರೆಯ ಮಧ್ಯಭಾಗದಲ್ಲಿ ಹೋಗಿದ್ದ ಬಾಲಕರು ಈಜಲು ಆಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತ ಬಾಲಕರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ(10) ಎಂದು ಗುರುತಿಸಲಾಗಿದೆ.
ಸದ್ಯ ಮೂವರು ಬಾಲಕರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಹೊರತೆಗೆದಿದ್ದಾರೆ.ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.ಮೃತ ಬಾಲಕರ ದೇಹಗಳನ್ನು ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಸಿಂಗನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Share This Article
";